ವಿಷಯಕ್ಕೆ ಹೋಗಿ

28. ಕಂಪ್ಯೂಟರ್ ಕನ್ನಡ ಅನುಷ್ಠಾನ ಹಾದಿ - ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೆಜ್ಜೆಗಳು


      ಸರ್ಕಾರದ ಇಲಾಖೆಗಳ ಕಂಪ್ಯೂಟರುಗಳಲ್ಲಿ ಕನ್ನಡ ಬಳಕೆ ಹೆಚ್ಚಿಸುವ ಕ್ರಮಗಳನ್ನು ಗುರುತಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡುವುದೂ ಸಹ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಕಾರ್ಯಗಳಲ್ಲಿ ಒಂದು.  ಪ್ರಾಧಿಕಾರದ ಹಲವು ಅಧ್ಯಕ್ಷರು ತಮ್ಮತಮ್ಮ ಅಧಿಕಾರಾವಧಿಯಲ್ಲಿ ಕಂಪ್ಯೂಟರ್‌ನಲ್ಲಿ ಕನ್ನಡ ಅನುಷ್ಠಾನಗೊಳಿಸುವಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ.

        ಕನ್ನಡ ಮತ್ತು ಕಂಪ್ಯೂಟರ್ ಕ್ಷೇತ್ರದಲ್ಲಿ ಆಗಬೇಕಾದ ಕೆಲಸ ಕಾರ್ಯಗಳ ಕುರಿತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ೧೯೯೩ರ ಕನ್ನಡ ಜಾಗೃತಿ ವರ್ಷಾಚರಣೆಯ ಸಂದರ್ಭದಿಂದ ಆರಂಭಿಸಿ ಇಂದಿನವರೆವಿಗೂ, ಹಲವಾರು ತಜ್ಞರೊಂದಿಗೆ ಹಲವಾರು ಸಭೆಗಳನ್ನು ನಡೆಸಿ ಸರಕಾರಕ್ಕೆ ಶಿಫಾರಸುಗಳನ್ನು ಕಳುಹಿಸಿದೆ. ಅಲ್ಲದೆ, ಈ ವಿಷಯದ ಕುರಿತಾಗಿ ಹಲವಾರು ವಿಚಾರ ಸಂಕಿರಣ ಮತ್ತು ಸಮಾವೇಶಗಳನ್ನು ಸಂಘಟಿಸಿದೆ. ಕನ್ನಡದ ಆಸಕ್ತ ತಂತ್ರಜ್ಞರು, ಕನ್ನಡ ಗಣಕ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಅಂದಿನ ಕರ್ನಾಟಕ ಸರಕಾರದ ಗಣಕ ಕೇಂದ್ರ’ (ಇಂದಿನ ಮಾಹಿತಿ ತಂತ್ರಜ್ಞಾನ ಇಲಾಖೆ) ಇವುಗಳ ಸಹಯೋಗದೊಂದಿಗೆ, ಕನ್ನಡವನ್ನು ಕಂಪ್ಯೂಟರಿನಲ್ಲಿ ಸಮಗ್ರವಾಗಿ ಬಳಸುವಲ್ಲಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಕ್ರಿಯ ಪಾತ್ರವನ್ನು ವಹಿಸಿದೆ. ಈ ನಿಟ್ಟಿನಲ್ಲಿ ಕೈಗೊಂಡ ಪ್ರಾಧಿಕಾರದ ಕ್ರಮಗಳು ದಾಖಲಾರ್ಹ ಸಂಗತಿಗಳಾಗಿವೆ. ಡಾ||ಎಚ್.ನರಸಿಂಹಯ್ಯನವರ ಅಧ್ಯಕ್ಷತೆಯ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ೧೯೯೫ರಲ್ಲಿ ತನ್ನ ಕನ್ನಡ ಜಾಗೃತಿದ್ವೈಮಾಸಿಕದ ಕಂಪ್ಯೂಟರ್ ವಿಶೇಷ ಸಂಚಿಕೆಯನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಉದ್ದೇಶಕ್ಕಾಗಿ ಕಂಪ್ಯೂಟರ್‌ನಲ್ಲಿ ಕನ್ನಡ ಬಳಸಲು ಲಭ್ಯವಿರುವ ತಂತ್ರಾಂಶಗಳ ವಿವರಗಳನ್ನು ನೀಡಲಾಗಿದೆ.

೧೯೯೯ರಲ್ಲಿ ಪ್ರೊ.ಚಂದ್ರಶೇಖರ ಪಾಟೀಲರ (ಚಂಪಾ) ಅಧ್ಯಕ್ಷತೆಯ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮಾಡಿದ ಶಿಫಾರಸ್ಸಿನ ಅನುಸಾರ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡಕ್ಕೆ ಒಂದು ಏಕರೂಪದ ಶಿಷ್ಟ ಕೀಲಿಮಣೆ ವಿನ್ಯಾಸವನ್ನು ಮತ್ತು ಕನ್ನಡ ಅಕ್ಷರಗಳಿಗೆ ಏಕರೂಪದ ಕಂಪ್ಯೂಟರ್ ಅಕ್ಷರಭಾಗಗಳು (ಗ್ಲಿಫ್‌ಗಳು) ಮತ್ತು ಅವುಗಳ ಸಂಕೇತ ಸಂಖ್ಯೆಗಳನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿತು. ಇದರ ಅನುಷ್ಠಾನದಿಂದ ಮಾಹಿತಿ ವಿನಿಮಯದ ಸಮಸ್ಯೆಗಳು ಪರಿಹಾರಗೊಂಡವು.  ೨೦೦೦ರಲ್ಲಿ ಕನ್ನಡದ ಉಚಿತ ತಂತ್ರಾಂಶವಾದ ಕಲಿತ’ (ಕನ್ನಡ ಲಿಪಿ ತಂತ್ರಾಂಶ) ಹೆಸರಿನ ತಂತ್ರಾಂಶವನ್ನು ಕನ್ನಡ ಗಣಕ ಪರಿಷತ್ತು ಸಿದ್ಧಪಡಿಸಿ ಸಾರ್ವಜನಿಕ ಮತ್ತು ಸರ್ಕಾರದ ಉಚಿತ ಬಳಕೆಗೆ ಬಿಡುಗಡೆ ಮಾಡಿತು. ಇದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸ್ಸಿನ ಅನ್ವಯ ಕರ್ನಾಟಕ ಸರ್ಕಾರ ಅನುದಾನ ನೀಡಿತ್ತು.

ಕಂಪ್ಯೂಟರ್‌ನಲ್ಲಿ ಕನ್ನಡದ ಅಳವಡಿಕೆ ಮತ್ತು ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರೊ||ಬರಗೂರು ರಾಮಚಂದ್ರಪ್ಪನವರ ಅಧ್ಯಕ್ಷತೆಯ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನ್ನ ಕಂಪ್ಯೂಟರ್ ಕನ್ನಡೀಕರಣ ಕ್ರಿಯಾ ಯೋಜನೆಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ವಿತರಿಸಿದೆ. ಕಂಪ್ಯೂಟರ್‌ನಲ್ಲಿ ಕನ್ನಡ ಸಂವಹನವು ಸಾಧ್ಯವಾಗುವಂತೆ ಮಾಡಲು ಖಾಸಗಿಯವರು ಸಿದ್ಧಪಡಿಸಿದ ಕನ್ನಡ ತಂತ್ರಾಂಶಗಳನ್ನು ಪ್ರಮಾಣೀಕರಿಸುವ ಅವಶ್ಯಕತೆ ಇತ್ತು. ಅದಕ್ಕಾಗಿ ಸರ್ಕಾರವೇ ಒಂದು ಮಾನಕ ಕನ್ನಡ ಲಿಪಿ ತಂತ್ರಾಂಶವನ್ನು ಸಿದ್ಧಪಡಿಸಲು ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈಗಾಗಲೇ ಇಂಗ್ಲಿಷ್‌ನಲ್ಲಿ ಲಭ್ಯವಿದ್ದು, ಕಛೇರಿಗಳಲ್ಲಿ ದಿನನಿತ್ಯದ ಬಳಕೆಗೆ ಅಗತ್ಯವಿರುವ ಕೆಲವು ತಂತ್ರಾಂಶಗಳನ್ನು ಕನ್ನಡದಲ್ಲಿ ರೂಪಿಸುವುದು; ನಿರ್ದಿಷ್ಟ ಬಳಕೆಗೆ ಹೊಸ ಕನ್ನಡದ ತಂತ್ರಾಂಶಗಳನ್ನು ಸಿದ್ಧಪಡಿಸುವುದು; ಬಳಕೆದಾರರ ಅಗತ್ಯಕ್ಕೆ ತಕ್ಕಹಾಗೆ ಹುಡುಕಿಕೊಳ್ಳಲು ಡೇಟಾ ಬ್ಯಾಂಕ್ ರೂಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು. ಸಮಾನ ಕನ್ನಡದ ಲಿಪಿತಂತ್ರಾಂಶ; ಪರಿವರ್ತಕ ತಂತ್ರಾಂಶಗಳು; ಅಕ್ಷರಶೈಲಿಗಳು (ಫ಼ಾಂಟ್ಸ್); ಕನ್ನಡ ಲಿಪಿತಂತ್ರಾಂಶದ ಯುನಿಕೋಡ್ ಆವೃತ್ತಿ (ವಿಂಡೋಸ್ ಮತ್ತು ಲೈನೆಕ್ಸ್); ಅಕಾರಾದಿ ವಿಂಗಡಣೆ (ಸಾರ್ಟಿಂಗ್); ಸೂಚೀಕರಣ (ಇಂಡೆಕ್ಸಿಂಗ್) ಸೌಲಭ್ಯಗಳು; ಪದಪರೀಕ್ಷೆ ಮತ್ತು ವ್ಯಾಕರಣ ಪರೀಕ್ಷೆ (ಸ್ಪೆಲ್ ಚೆಕ್ ಮತ್ತು ಗ್ರಾಮರ್ ಚೆಕ್) ಸೌಲಭ್ಯಗಳು; ಲೋಗೋ ತಂತ್ರಾಂಶ; ಕೈಬರಹ ಮತ್ತು ಮುದ್ರಿತ ಪಠ್ಯವನ್ನು ಕಂಪ್ಯೂಟರ್ ಲಿಪಿಯನ್ನಾಗಿಸುವ ತಂತ್ರಾಂಶ; ಕನ್ನಡದಲ್ಲಿ ಮೈಕ್ರೋಸಾಫ್ಟ್ ಆಫೀಸ್ - ಇವುಗಳನ್ನು ಸಿದ್ಧಪಡಿಸಲು ಸದರಿ ಕ್ರಿಯಾಯೋಜನೆಯಲ್ಲಿ ಉದ್ದೇಶಿಸಲಾಗಿತ್ತು. ಅಷ್ಟೇಅಲ್ಲದೆ, ಸಾಮಾನ್ಯ ಆಡಳಿತ ತಂತ್ರಾಂಶ; ಗ್ರಂಥಾಲಯ ತಂತ್ರಾಂಶ; ವಾಣಿಜ್ಯ ವ್ಯವಹಾರ ತಂತ್ರಾಂಶ; ಶಾಲಾ-ಕಾಲೇಜುಗಳ ಆಡಳಿತ ನಿರ್ವಹಣೆ ತಂತ್ರಾಂಶ; ಅನುವಾದ ತಂತ್ರಾಂಶ ಮುಂತಾದ ಕನ್ನಡದ ಆನ್ವಯಿಕ ತಂತ್ರಾಂಶಗಳನ್ನು ತಯಾರಿಸಲು ಉದ್ದೇಶಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ಸಮಾನ ಲಿಪಿತಂತ್ರಾಂಶ, ಲೋಗೋ ತಂತ್ರಾಂಶ (ಶಾಲಾಮಕ್ಕಳು ಕನ್ನಡದಲ್ಲಿಯೇ ಪ್ರೋಗ್ರಾಮಿಂಗ್ ಕಲಿಯಲು ಉಪಯುಕ್ತವಾದ ತಂತ್ರಾಂಶ) ಕೆಲವು ಯುನಿಕೋಡ್ ಫಾಂಟ್‌ಗಳು ಮತ್ತು ತಂತ್ರಾಂಶ ಪರಿವರ್ತಕಗಳನ್ನು ಹೊರತುಪಡಿಸಿ ಬೇರೆ ಬಹುತೇಕ ಕೆಲಸಗಳು ಅನುಷ್ಠಾನಗೊಂಡಿಲ್ಲ. ಪ್ರೊ.ಚಂಪಾ ಕಾಲದಲ್ಲಿ ಸಿದ್ಧಗೊಂಡ ಕಲಿತಹೆಸರಿನ ಕನ್ನಡ ತಂತ್ರಾಂಶಕ್ಕೆ ನುಡಿಎಂಬ ಹೆಸರನ್ನು ನಾಮಕರಣ ಮಾಡಿದವರು ಪ್ರೊ.ಬರಗೂರು ರಾಮಚಂದ್ರಪ್ಪ. ಅಂದಿನಿಂದ ನುಡಿಯ ಹಲವು ಆವೃತ್ತಿಗಳು ಹೊರಬಂದಿವೆ. ಪ್ರಸ್ತುತ, ನುಡಿ ೫.೦ ಆವೃತ್ತಿಯು ಬಳಕೆಯಲ್ಲಿದೆ. ಬರಗೂರು ರಾಮಚಂದ್ರಪ್ಪನವರ ಅವಧಿಯಲ್ಲಿ ಪ್ರಾಧಿಕಾರವು ಕಂಪ್ಯೂಟರ್ ಪದವಿವರಣ ಕೋಶವನ್ನು ಪ್ರಕಟಿಸಿದೆ.

        ೨೦೦೬ರಲ್ಲಿ ಡಾ||ಸಿದ್ಧಲಿಂಗಯ್ಯನವರ ಅಧ್ಯಕ್ಷತೆಯ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನ್ನ ಅಧಿಕೃತ ಜಾಲತಾಣವನ್ನು ಆರಂಭಿಸಿತು. ಸರ್ಕಾರದ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನದ ಎಲ್ಲ ಆದೇಶಗಳ ಪ್ರತಿಗಳನ್ನು ಜಾಲತಾಣದಲ್ಲಿ ಅಳವಡಿಸಲಾಯಿತು. ಅಂದು, ಸರ್ಕಾರದ ಎಲ್ಲ ಜಾಲತಾಣಗಳ ಕನ್ನಡೀಕರಣ ಕಾರ್ಯಕ್ಕೆ ಸಿದ್ದಲಿಂಗಯ್ಯನವರು ಪ್ರಯತ್ನಿಸಿದರು. ಆದರೂ ಸಹ ಇಂದಿಗೂ ಸರಕಾರದ ಜಾಲತಾಣಗಳಲ್ಲಿ ಇಂಗ್ಲಿಷ್ ರಾರಾಜಿಸುತ್ತಿದೆ. ಕನ್ನಡವು ಕಂಡೂ ಕಾಣದಂತೆ ಸೀಮಿತ ಪ್ರಮಾಣದಲ್ಲಿ ಬಳಕೆಯಾಗುತ್ತಿದೆ. ಹೆಚ್ಚಿನ ಮಾಹಿತಿಗಳು ಇಂಗ್ಲಿಷ್‌ನಲ್ಲಿಯೇ ಇವೆ. ಕೆಲವೊಂದು ಜಾಲತಾಣಗಳು ಕನ್ನಡಎಂಬ ಕೊಂಡಿಯನ್ನು ಹೊಂದಿದ್ದು ಅದನ್ನು ಒತ್ತಿದರೆ, ‘ಅಂಡರ್ ಕನ್‌ಸ್ಟ್ರಕ್ಷನ್ಎಂಬ ಇಂಗ್ಲಿಷ್ ಸಂದೇಶವು ಪ್ರಕಟಗೊಳ್ಳುತ್ತದೆ. ಇಂದಿಗೂ ಕನ್ನಡದ ಮಾಹಿತಿಗಳನ್ನು ಎಲ್ಲ ಜಾಲತಾಣಗಳಲ್ಲಿ ಸೇರಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ನುಡಿಫಾಂಟನ್ನು ಬಳಸಿ ಪೂರ್ಣಪ್ರಮಾಣದಲ್ಲಿ ತನ್ನ ಜಾಲತಾಣವನ್ನು ಮೊದಲಿಗೆ ಕನ್ನಡದಲ್ಲಿ ರೂಪಿಸಿತು.  ಸಂಪೂರ್ಣ ಕನ್ನಡಮಯವಾದ ಜಾಲತಾಣಗಳು ಹಿಂದೆ ಅಪರೂಪವಾಗಿದ್ದವು. ಯುನಿಕೋಡ್ ಫಾಂಟುಗಳು ಬಳಕೆಗೆ ಬಂದ ನಂತರ ಕನ್ನಡದ ಜಾಲತಾಣಗಳ ಸಂಖ್ಯೆ ಹೆಚ್ಚಾಗಿದೆ.

        ಪ್ರಸ್ತುತ, ಪ್ರೊ.ಎಸ್.ಜಿ.ಸಿದ್ಧರಾಮಯ್ಯನವರ ಅಧ್ಯಕ್ಷತೆಯ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರದ ಜಾಲತಾಣಗಳನ್ನು ಕನ್ನಡೀಕರಣಗೊಳಿಸಲು ಮತ್ತು ಶಿಷ್ಟತೆಗಳನ್ನು ಅಳವಡಿಸಲು ಬೇಳೂರು ಸುದರ್ಶನ ವರದಿಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅಲ್ಲದೆ, ಕಂಪ್ಯೂಟರ್ ತಂತ್ರಜ್ಞಾನದ ಇಂಗ್ಲಿಷ್ ಪದಗಳಿಗೆ ಕನ್ನಡದಲ್ಲಿ ಪದವಿವರಣ ಕೋಶವೊಂದನ್ನು ಪ್ರಾಧಿಕಾರವು ಪ್ರಕಟಿಸಿದೆ. ಇದರ ವಿದ್ಯುನ್ಮಾನ ಆವೃತ್ತಿಯೂ ಸಹ ಇ-ಪದ(http://www.epada.in )  ಜಾಲತಾಣದಲ್ಲಿ ಡೌನ್‌ಲೋಡ್‌ಗೆ ಲಭ್ಯವಿದೆ.
        ಕನ್ನಡ ಗಣಕ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮನವಿಯ ಮೇರೆಗೆ ಅಭಿವೃದ್ಧಿ ಪ್ರಾಧಿಕಾರವು ಕನ್ನಡಕ್ಕೆ ಒಂದು ಪ್ರತ್ಯೇಕ ಗಣಕ ಸಲಹಾ ಸ್ಥಾಯೀ ಸಮಿತಿಯನ್ನು ರಚಿಸಬೇಕೆಂದು ೧೯೯೮ರಲ್ಲಿ ಮೊದಲಿಗೆ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕಂಪ್ಯೂಟರ್‌ನಲ್ಲಿ ಕನ್ನಡದ ಸಮಗ್ರ ಬಳಕೆಯನ್ನು ಸರಕಾರದ ಮಟ್ಟದಲ್ಲಿ ಅನುಷ್ಠಾನಗೊಳಿಸುವಲ್ಲಿ ಇರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸರಕಾರಕ್ಕೆ ಕಾಲಕಾಲಕ್ಕೆ ಸೂಕ್ತ ಸಲಹೆಗಳನ್ನು ನೀಡುವ ಉದ್ದೇಶದಿಂದ ಈ ಸಲಹಾ ಸಮಿತಿಯ ರಚನೆಯ ಮನವಿಯನ್ನು ಸರಕಾರಕ್ಕೆ ಮಾಡಲಾಗಿತ್ತು. ೨೦೦೪ರಲ್ಲಿ ಅಂದಿನ ವಿಧಾನಪರಿಷತ್ ಸದಸ್ಯರು ಹಾಗೂ ಖ್ಯಾತ ಸಾಹಿತಿಗಳೂ ಆದ ಡಾ||ಚಂದ್ರಶೇಖರ ಕಂಬಾರರು ಇಂಥದೇ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಹಲವು ವರ್ಷಗಳ ಕಾಲವಿಳಂಬದ ನಂತರ ಕನ್ನಡ ಗಣಕ ಸಲಹಾ ಸ್ಥಾಯೀ ಸಮಿತಿಯು ಡಾ.ಚಿದಾನಂದಗೌಡರವರ ಅಧ್ಯಕ್ಷತೆಯಲ್ಲಿ ರಚನೆಯಾಯಿತು. ಕಂಪ್ಯೂಟರಿನಲ್ಲಿ ಕನ್ನಡದ ಸಮಗ್ರ ಬಳಕೆಗಾಗಿ ಸಮಿತಿಯು ತನ್ನ ಶಿಫಾರಸ್ಸುಗಳ ಸಹಿತ ಮೊದಲ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯ ಒಂದೆರಡು ಶಿಫಾರಸ್ಸುಗಳ ಹೊರತಾಗಿ ಬಹುತೇಕ ಶಿಫಾರಸ್ಸುಗಳು ಇಂದಿಗೂ ಜಾರಿಗೊಂಡಿಲ್ಲ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

51. ಕಂಪ್ಯೂಟರ್ ಮತ್ತು ತಂತ್ರಜ್ಞಾನ : ಕನ್ನಡದಲ್ಲಿ ಪ್ರಕಟಿತ ಸಾಹಿತ್ಯದ ಒಂದು ಅವಲೋಕನ

ಕಂಪ್ಯೂಟರ್ ಕಲಿಕೆಗಾಗಿ ಹಲವಾರು ಕನ್ನಡ ಪುಸ್ತಕಗಳು ವಿವಿಧ ಕಾಲಘಟ್ಟಗಳಲ್ಲಿ ಪ್ರಕಟವಾಗಿವೆ. ೧೯೮೦ರ ದಶಕದ ಆರಂಭದಲ್ಲಿ ಕಂಪ್ಯೂಟರ್ ಕುರಿತು ಕನ್ನಡದಲ್ಲಿ ‘ ಗಣಕಯಂತ್ರಗಳು ’ ಎಂಬ ಮೊಟ್ಟಮೊದಲ ಪುಸ್ತಕವನ್ನು ರಚಿಸಿದವರು ಅಮೆರಿಕದಲ್ಲಿ ನೆಲೆಸಿದ್ದ ಶ್ರೀಮತಿ ನಳಿನಿ ಮೂರ್ತಿ. ತದನಂತರದಲ್ಲಿ , ಪ್ರಮುಖವಾಗಿ ಗುರುತಿಸಬಹುದಾದ ಪುಸ್ತಕಗಳು ಪ್ರಕಟಗೊಂಡಿವೆ. ಮಕ್ಕಳಿಗಾಗಿ ಕೆಲವು ಸಣ್ಣ ಸಣ್ಣ ಪುಸ್ತಕಗಳನ್ನು ಇನ್‌ಪೋಸಿಸ್ ಫೌಂಡೇಷನ್‌ನ ಶ್ರೀಮತಿ ಸುಧಾಮೂರ್ತಿಯವರು ರಚಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗವು ೧೯೯೩ರಲ್ಲಿ ‘ ಕಂಪ್ಯೂಟರ್ ’ ಎಂಬ ಶೀರ್ಷಿಕೆಯ ಒಂದು ಪುಸ್ತಕವನ್ನು ಪ್ರಕಟಿಸಿದೆ. ಶ್ರೀ ಕೆ.ಹರಿದಾಸ ಭಟ್‌ರವರು ಇದನ್ನು ರಚಿಸಿದ್ದಾರೆ. ಕಂಪ್ಯೂಟರ್ ಕುರಿತ ವಿವರಣಾತ್ಮಕ ಅಧ್ಯಾಯಗಳು , ವಿವಿಧ ಕ್ಷೇತ್ರಗಳಲ್ಲಿ ಕಂಪ್ಯೂಟರ್ ಬಳಕೆ ಮತ್ತು ಭವಿಷ್ಯದಲ್ಲಿ ಕಂಪ್ಯೂಟರ್ ಬಳಕೆ ಕುರಿತಾಗಿ ಉಪಯುಕ್ತ ಮಾಹಿತಿಗಳು ಅದರಲ್ಲಿವೆ.           ಬೆಂಗಳೂರಿನ ಡೈನಾರಾಮ್ ಪಬ್ಲಿಕೇಷನ್ಸ್ ೧೯೯೪ರಲ್ಲಿ ‘ ಕಂಪ್ಯೂಟರ್ - ಮೂಲತತ್ವಗಳು ಮತ್ತು ಪ್ರೋಗ್ರಾಮ್ ರಚನೆ ’ ಎಂಬ ಪುಸ್ತಕವನ್ನು ಪ್ರಕಟಿಸಿದೆ. ವಿವಿಧ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಿದ್ದ , ಕಂಪ್ಯೂಟರ್ ತಜ್ಞರಾದ ಪ್ರೊ || ಆರ್.ಶ್ರೀಧರ್ ಇದನ್ನು ರಚಿಸಿದ್ದಾರೆ. ಕಂಪ್ಯೂಟರ್ ಕುರ...

13. ಕಂಪ್ಯೂಟರಿನಲ್ಲಿ ಕನ್ನಡ ಟೈಪಿಂಗ್ ಕಲಿಯಬೇಕೆ? ಕನ್ನಡದ ಅಧಿಕೃತ ಕೀಲಿಮಣೆ ವಿನ್ಯಾಸ’ ಬಳಸಿ

ಕಂಪ್ಯೂಟರಿನಲ್ಲಿ ಕನ್ನಡ ಲಿಪಿತಂತ್ರಾಂಶಗಳನ್ನು ಅಳವಡಿಸಿ , ಇರುವ ಇಂಗ್ಲಿಷ್ ಕೀಬೋರ್ಡ್‌ನ್ನೇ ಬಳಸಿ ಕನ್ನಡದಲ್ಲಿ ವೇಗದ ಟೈಪಿಂಗ್‌ನ್ನು ಸುಲಭವಾಗಿ ಕಲಿಯಬಹುದು. ಇಂಗ್ಲಿಷ್‌ನ ೨೬ ಕೀಲಿಗಳನ್ನೇ ಬಳಸಿ , ನೆನಪಿನ ಶಕ್ತಿಗೆ ಹೆಚ್ಚಿನ ಒತ್ತಡವಿಲ್ಲದೆ , ತರ್ಕಬದ್ಧವಾಗಿ ಕನ್ನಡ ಭಾಷೆಯ ಪಠ್ಯವನ್ನು ಬೆರಳಚ್ಚಿಸಬಹುದಾದ ವಿನ್ಯಾಸ ಎಂದರೆ ಅದು ಕನ್ನಡದ ’ ಸ್ಟ್ಯಾಂಡರ್ಡ್ ಕೀಬೋರ್ಡ್ ಲೇಔಟ್ ’ ( ಕೆ.ಪಿ.ರಾವ್ ವಿನ್ಯಾಸ). ಇಂಗ್ಲಿಷ್‌ಕೀಲಿಗಳ ಸ್ಥಾನದಲ್ಲೇ ಕನ್ನಡ ಭಾಷೆಯ ಅಕ್ಷರ ಸ್ಥಾನಗಳನ್ನು ನಿಗದಿಪಡಿಸಿರುವ ಕಾರಣ , ಈಗಾಗಲೇ ವೇಗದ ಇಂಗ್ಲಿಷ್ ಟೈಪಿಂಗ್ ಕಲಿತವರಿಗೆ ಈ ವಿನ್ಯಾಸವನ್ನು ಬಳಸಿ ವೇಗದ ಕನ್ನಡ ಟೈಪಿಂಗ್ ಕಲಿಯುವುದು ಬಹಳ ಸುಲಭ. ಭಾರತೀಯ ಭಾಷೆಗಳ ಪಠ್ಯವನ್ನು ಸುಲಭವಾಗಿ ಬೆರಳಚ್ಚಿಸಲು ಸಾಧ್ಯವಾಗುವ ಇಂತಹ ಉತ್ತಮ ಕೀಲಿಮಣೆ ವಿನ್ಯಾಸದ ರೂವಾರಿ ಕನ್ನಡಿಗರಾದ ನಾಡೋಜ ಡಾ.ಕೆ.ಪಿ.ರಾವ್‌ರವರು.   ೧೯೯೯ರಲ್ಲಿ ಕರ್ನಾಟಕ ರಾಜ್ಯ ಸರಕಾರವು ಇದನ್ನು ‘ ಕನ್ನಡದ ಅಧಿಕೃತ ಕೀಲಿಮಣೆ ವಿನ್ಯಾಸ ’ ಎಂದು ಅಂಗೀಕರಿಸಿದೆ. ಕನ್ನಡ ಟೈಪಿಂಗ್‌ನ್ನು ಹೊಸದಾಗಿ ಕಲಿಯಬಯಸುವವರು ಇದೇ ವಿನ್ಯಾಸವನ್ನು ಕಲಿಯುವುದು ಉತ್ತಮ. ವೇಗದ ಟೈಪಿಂಗ್ ಕಲಿಯುವ ಮುನ್ನ , ಮೊದಲಿಗೆ , ಇಂಗ್ಲಿಷ್‌ನ ಯಾವ ಕೀಲಿಯನ್ನು ಒತ್ತಿದರೆ ಕನ್ನಡದ ಯಾವ ಅಕ್ಷರಗಳು ಮೂಡುತ್ತವೆ ಎಂಬ ಪ್ರಾಥಮಿಕ ಜ್ಞಾನ ಪಡೆಯಬೇಕು. ನಂತರ , ಗುಣಿತಾಕ್ಷರಗಳನ್ನು ಮತ್ತು ಒತ್ತಕ್ಷರಗಳನ್ನು ಮೂಡಿಸ...

32. ಕನ್ನಡ ತಂತ್ರಾಂಶ ಅಭಿವೃದ್ಧಿಯಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಕಳಕಳಿ ಕಾಳಜಿಗಳು

ಪರಿಸರ ಕುರಿತ ಸಂಶೋಧನೆ ನಡೆಸಲು ಖ್ಯಾತ ಸಾಹಿತಿ ಮತ್ತು ಪರಿಸರ ಪ್ರೇಮಿ ಡಾ.ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಸ್ಮರಣಾರ್ಥ ‘ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ’ ಸ್ಥಾಪನೆಗೆ ಕಳೆದ ವರ್ಷದ ಬಜೆಟ್‌ನಲ್ಲಿ ಐದು ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು. ಅಧ್ಯಕ್ಷರು , ಸದಸ್ಯರ ನೇಮಕಾತಿಯ ಸರ್ಕಾರೀ ಆದೇಶವು ಈ ವರ್ಷ ಹೊರಬಂದು ಪ್ರತಿಷ್ಠಾನ ಅಸ್ತಿತ್ವಕ್ಕೆ ಬಂದಿದೆ. ಹಲವು ಉದ್ದೇಶಗಳನ್ನು ಹೊಂದಿರುವ ಪ್ರತಿಷ್ಠಾನವು , ಪ್ರತಿವರ್ಷ ಪರಿಸರ , ಸಾಹಿತ್ಯ , ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಮತ್ತು ವಿದ್ಯಾರ್ಥಿ ವೇತನ ನೀಡುವ ಕೆಲಸವನ್ನು ಸಹ ಮಾಡಲಿದೆ. ಪರಿಸರ , ವಿಜ್ಞಾನ ಮತ್ತು ತಂತ್ರಜ್ಞಾನದ ‘ ಕನ್ನಡ ವಿಷಯ ಸಾಹಿತ್ಯ ’ ವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ತೇಜಸ್ವಿಯವರಿಗೆ ಸಂದಿದೆ. ಕನ್ನಡ ತಂತ್ರಾಂಶ ಅಭಿವೃದ್ಧಿ ,   ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತಾಗಿ ತೇಜಸ್ವಿಯವರೊಂದಿಗೆ ಒಡನಾಡುವ ಹಲವು ಅವಕಾಶಗಳು ಈ ಅಂಕಣಕಾರನಿಗೆ ಒದಗಿಬಂದಿತ್ತು. ತೇಜಸ್ವಿಯವರಿಗೆ ಕನ್ನಡವನ್ನು ಕಂಪ್ಯೂಟರಿನಲ್ಲಿ ಸ್ವತಃ ಬಳಸಿದ ಅನುಭವವಿತ್ತು. ಅದರ ಸಮಸ್ಯೆಗಳ ಬಗ್ಗೆ ಅರಿವಿತ್ತು. ಅವುಗಳ ಪರಿಹಾರಗಳಿಗಾಗಿ ಹಲವು ಪ್ರಯತ್ನಗಳನ್ನು ಅವರು ಮಾಡಿದರು. ಕಂಪ್ಯೂಟರ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಮರ್ಥವಾಗಿ ಕನ್ನಡ ಬಳಸಿ ವಿದ್ಯುನ್ಮಾನ ಮಾಧ್ಯಮದಲ್ಲಿಯೂ ಕನ್ನಡವನ್ನು ಉಳಿಸಿಬೆಳೆಸುವ ಅವಶ್ಯಕತೆಯನ್ನು ಅವರು ಮನಗಂಡಿದ್ದರು. ...